ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣ

ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣ
ಅಖಿಳ ಗುಣ ಸದ್ಧಾಮ ಮಧ್ವನಾಮ ||ಪ||

ಆವ ಕಚ್ಚಪ ರೂಪದಿಂದ ಲಂಡೋದಕವ
ಓವಿ ಧರಿಸಿದ ಶೇಷಮೂರುತಿಯನು
ಆವವನ ಬಳಿವಿಡಿದು ಹರಿಯ ಸುರರೆಯ್ದುವರು
ಆ ವಾಯು ನಮ್ಮ ಕುಲಗುರುರಾಯನು ||1||

ಆವವನು ದೇಹದೊಳಗಿರಲು ಹರಿ ನೆಲಸಿಹನು
ಆವವನು ತೊಲಗೆ ಹರಿ ತಾ ತೊಲಗುವ
ಆವವನು ದೇಹದ ಒಳ ಹೊರಗೆ ನಿಯಾಮಕನು
ಆ ವಾಯು ನಮ್ಮ ಕುಲಗುರುರಾಯನು ||2||

ಕರುಣಾಭಿಮಾನಿ ಸುರರು ದೇಹವ ಬಿಡಲು
ಕುರುಡ ಕಿವುಡ ಮೂಕನೆಂದೆನಿಸುವ
ಪರಮ ಮುಖ್ಯಪ್ರಾಣ ತೊಲಗಲಾ ದೇಹವನು
ಅರಿತು ಪೆಣವೆಂದು ಪೇಳುವರು ಬುಧಜನ ||3||

ಸುರರೊಳಗೆ ನರರೊಳಗೆ ಸರ್ವ ಭೂತಗಳೊಳಗೆ
ಪರತರನೆನಿಸಿ ನಿಯಾಮಿಸಿ ನೆಲಸಿಹ
ಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳು
ಗುರು ಕುಲತಿಲಕ ಮುಖ್ಯ ಪವಮಾನನು ||4||

ತ್ರೇತೆಯಲಿ ರಘುಪತಿಯ ಸೇವೆ ಮಾಡುವೆನೆಂದು
ವಾತಸುತ ಹನುಮಂತನೆಂದೆನಿಸಿದ
ಪೋತ ಭಾವದಿ ತರಣಿ ಬಿಂಬಕ್ಕೆ ಲಂಘಿಸಿದ
ಈತಗೆಣೆಯಾರು ಮೂರ್ಲೋಕದೊಳಗೆ ||5||

ತರಣಿಗಭಿಮುಖನಾಗಿ ಶಬ್ದ ಶಾಸ್ತ್ರವ ರಚಿಸಿ
ಉರವಣಿಸಿ ಹಿಂದು ಮುಂದಾಗಿ ನಡೆದ
ಪರಮ ಪವಮಾನಸುತ ಉದಯಾಸ್ತ ಶೈಲಗಳ
ಭರದಿಯೈದಿದಗೀತಗುಪಮೆ ಉಂಟೇ ||6||

ಅಖಿಳ ವೇದಗಳ ಸಾರಪಠಿಸಿದನು ಮುನ್ನಲ್ಲಿ
ನಿಖಿಳ ವ್ಯಾಕರಣಗಳ ಇವ ಪಠಿಸಿದ
ಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದು
ಮುಖ್ಯಪ್ರಾಣನನು ರಾಮನನುಕರಿಸಿದ ||7||

ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿ
ಧರಣಿಸುತೆಯಳ ಕಂಡು ದನುಜರೊಡನೆ
ಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳ
ಉರುಹಿ ಲಂಕೆಯ ಬಂದ ಹನುಮಂತನು ||8||

ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿ
ಶರಧಿಯನು ಕಟ್ಟಿ ಬಲು ರಕ್ಕಸರನು
ಒರಸಿ ರಣದಲಿ ದಶಶಿರನ ಹುಡಿಗುಟ್ಟಿದ
ಮೆರೆದ ಹನುಮಂತ ಬಲವಂತ ಧೀರ ||9||

ಉರಗ ಬಂಧಕೆ ಸಿಲುಕಿ ಕಪಿವರರು ಮೈಮರೆಯೆ
ತರಣಿ ಕುಲತಿಲಕನಾಜ್ಞೆಯ ತಾಳಿದ
ಗಿರಿಸಹಿತ ಸಂಜೀವನವ ಕಿತ್ತು ತಂದಿತ್ತ
ಹರಿವರಗೆ ಸರಿಯುಂಟೆ ಹನುಮಂತಗೆ ||10||

ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆ
ಭಜಿಸಿ ಮೌಕ್ತಿಕದ ಹಾರವನು ಪಡೆದ
ಅಜಪದವಿಯನು ರಾಮ ಕೊಡುವೆನೆನೆ ಹನುಮಂತ
ನಿಜಭಕುತಿಯನೆ ಬೇಡಿ ವರವ ಪಡೆದ ||11||

ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ
ಸೋಮಕುಲದಲಿ ಜನಿಸಿ ಪಾರ್ಥನೊಡನೆ
ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದ
ಆ ಮಹಿಮನಮ್ಮ ಕುಲಗುರು ರಾಯನು ||12||

ಕರದಿಂದಶಿಶುಭಾವನಾದ ಭೀಮನ ಬಿಡಲು
ಗಿರಿವಡೆದುಶತಶೃಂಗವೆಂದೆನಿಸಿತು
ಹರಿಗಳ ಹರಿಗಳಿಂ ಕರಿಗಳ ಕರಿಗಳಿಂ
ಅರೆವ ವೀರನಿಗೆ ಸುರ ನರರು ಸರಿಯೇ ||13||

ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿ
ಹಸಿದುರಗಗಳ ಮ್ಯಾಲೆ ಬಿಡಲದನೊರಸಿದ
ಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರ
ಧರಿಸಿ ಜಾಹ್ನವಿಗೊಯ್ದ ತನ್ನನುಜರ ||14||

ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರ
ನಿಲ್ಲದೊರಸಿದ ಲೋಕಕಂಟಕರನು
ಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದು
ಎಲ್ಲ ಸುಜನರಿಗೆ ಹರುಷವ ತೋರಿದ ||15||

ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿ
ರಾಜಸೂಯ ಯಾಗವನು ಮಾಡಿಸಿದನು
ಆಜಿಯೊಳು ಕೌರವರ ಬಲವ ಸವರುವೆನೆಂದು
ಮೂಜಗವರಿಯೆ ಕಂಕಣ ಕಟ್ಟಿದ ||16||

ಮಾನನಿಧಿ ದ್ರೌಪದಿಯ ಮನದಿಂಗಿತವನರಿತು
ದಾನವರ ಸವರಬೇಕೆಂದು ಬ್ಯಾಗ
ಕಾನನವ ಪೊಕ್ಕು ಕಿಮ್ಮೀರಾದಿಗಳ ತರಿದು
ಮಾನಿನಿಗೆ ಸೌಗಂಧಿಕವನೆ ತಂದ ||17||

ದುರುಳ ಕೀಚಕನು ತಾಂ ದ್ರೌಪದಿಯ ಚಲುವಿಕೆಗೆ
ಮರುಳಾಗಿ ಕರೆಕರೆಯ ಮಾಡಲವನಾ
ಗರಡಿ ಮನೆಯಲ್ಲಿ ವರೆಸಿ ಅವನನ್ವಯದ
ಕುರುಪನಟ್ಟಿದ ಮಲ್ಲಕುಲವ ಸದೆದ ||18||

ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿ
ಓರಂತೆ ಕೌರವನ ಮುರಿದು ಮೆರೆದ
ವೈರಿ ದುಶ್ಯಾಸನ್ನ ರಣದಲ್ಲಿ ಎಡೆಗೆಡಹಿ
ವೀರ ನರಹರಿಯ ಲೀಲೆಯ ತೋರಿದ ||19||

ಗುರುಸುತನು ಸಂಗರದಿ ನಾರಾಯಣಾಸ್ತ್ರವನು
ಉರವಣಿಸಿ ಬಿಡಲು ಶಸ್ತ್ರವ ಬಿಸುಟರು
ಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಲಿ
ಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ ||20||

ಚಂಡ ವಿಕ್ರಮನು ಗದೆಗೊಂಡು ರಣದಿ ಭೂ
ಮಂಡಲದೊಳಿದಿರಾಂತ ಖಳರನೆಲ್ಲಾ
ಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನು
ಕಂಡುನಿಲ್ಲುವರಾರು ತ್ರಿಭುವನದೊಳು ||21||

ದಾನವರು ಕಲಿಯುಗದೊಳವತರಿಸಿ ವಿಬುಧರೊಳು
ವೇನನ ಮತವನರುಹಲದನರಿತು
ಜ್ಞಾನಿ ತಾ ಪವಮಾನ ಭೂತಳದೊಳವತರಿಸಿ
ಮಾನನಿಧಿ ಮಧ್ವಾಖ್ಯನೆಂದೆನಿಸಿದ ||22||

ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿ
ನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದ
ಉರ್ವಿಯೊಳು ಮಾಯೆ ಬೀರಲು ತತ್ವಮಾರ್ಗವನು
ಓರ್ವ ಮಧ್ವಮುನಿ ತೋರ್ದ ಸುಜನರ್ಗೆ ||23||

ಸರ್ವೇಶ ಹರಿ ವಿಶ್ವ ಎಲ್ಲ ತಾ ಪುಸಿಯೆಂಬ
ದುರ್ವಾದಿಗಳ ಮತವ ನೆರೆ ಖಂಡಿಸಿ
ಸರ್ವೇಶ ಹರಿ ವಿಶ್ವ ಸತ್ಯವೆಂದರುಹಿದಾ
ಶರ್ವಾದಿ ಗೀರ್ವಾಣ ಸಂತತಿಯಲಿ ||24||

ಬದರಿಕಾಶ್ರಮಕೆ ಪುನರಪಿಯೈದಿ ವ್ಯಾಸಮುನಿ
ಪದಕೆರಗಿ ಅಖಿಳ ವೇದಾರ್ಥಗಳನು
ಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವ
ಯ್ಯೆದಿದ ಮಧ್ವಮುನಿರಾಯಗಭಿವಂದಿಪೆ ||25||

ಜಯಜಯತು ದುರ್ವಾದಿಮತತಿಮಿರ ಮಾರ್ತಾಂಡ
ಜಯಜಯತು ವಾದಿಗಜ ಪಂಚಾನನ
ಜಯಜಯತು ಚಾರ್ವಾಕಗರ್ವಪರ್ವತ ಕುಲಿಶ
ಜಯ ಜಯ ಜಗನ್ನಾಥ ಮಧ್ವನಾಥ || 26 ||

ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿ
ಭಂಗವಿಲ್ಲದೆ ಸುಖದ ಸುಜನಕೆಲ್ಲ
ಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕ
ಶ್ರೀ ರಂಗ ವಿಠ್ಠಲನೆಂದು ನೆರೆ ಸಾರಿರೈ || 27 ||

ಮಧ್ವನಾಮ ಶ್ರೀ ಜಗನ್ನಾಥ ದಾಸರ ಫಲಶ್ರುತಿ

ಸೋಮ ಸೂರ್ಯೋಪರಾಗದಿ ಗೋಸಹಸ್ರಗಳ
ಭೂಮಿದೇವರಿಗೆ ಸುರನದಿಯ ತೀರದಿ
ಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕು
ಈ ಮಧ್ವನಾಮ ಬರೆದೋದಿದರ್ಗೆ ||1||

ಪುತ್ರರಿಲ್ಲದವರು ಸತ್ಪುತ್ರರೈದುವರು
ಸರ್ವತ್ರದಲಿ ದಿಗ್ವಿಜಯವಹುದು ಸಕಲ
ಶತ್ರುಗಳು ಕೆಡುವರಪಮೃತ್ಯು ಬರಲಂಜವುದು
ಸೂತ್ರನಾಮಕನ ಸಂಸ್ತುತಿ ಮಾತ್ರದಿ ||2||

ಶ್ರೀಪಾದರಾಯ ಪೇಳಿದ ಮಧ್ವನಾಮ ಸಂ
ತಾಪಕಳೆದಖಿಳ ಸೌಖ್ಯವನೀವುದು
ಶ್ರೀಪತಿ *ಜಗನ್ನಾಥವಿಠಲನ* ತೋರಿ ಭವ
ಕೂಪಾರದಿಂದ ಕಡೆ ಹಾಯಿಸುವುದು  ||3||

Leave a Reply